Tuesday, April 5, 2011
Friday, November 5, 2010
Friday, May 28, 2010
ಹಾಸನದ ಶಂಕರಮಠದಲ್ಲಿ ನಡೆದ ಸುಧಾಕರಶರ್ಮರ ಉಪನ್ಯಾಸದ ಚಿತ್ರಗಳು
Wednesday, May 5, 2010
Monday, July 13, 2009
ಅಶ್ವಮೇಧ ಯಾಗ:
ಇನ್ನು "ಮೇಧ" ಎಂದರೆ " ಸಂಗಮೇ" ಅಂದರೆ ಒಟ್ಟು ಗೂಡಿಸು.ಎಂದಾಗ ರಾಷ್ಟ್ರವನ್ನು ಒಟ್ಟು ಗೂಡಿಸಲು ಮಾಡುವ ಕಾರ್ಯಕ್ರಮಗಳೆಲ್ಲಾ " ಅಶ್ವಮೇಧ ಯಾಗವೇ" ಎಂದಂತಾಯ್ತು. ಎಂತಹಾ ಶ್ರೇಷ್ಠವಾದ ಅರ್ಥ ಇದೆಯಲ್ಲವೇ?. ಅಂದರೆ ವೇದಕ್ಕೆ ಸರಿಯಾದ ಅರ್ಥವಿದೆ,ಆದರೆ ನಾವು ಸರಿಯಾಗಿ ಅರ್ಥೈಸದೆ ತಪ್ಪಾಗಿ ಅರ್ಥೈಸಿದ್ದೇವೆ.
ಗೋಮೇಧ: ಗೋಮೇಧ ಎಂದಾಕ್ಷಣ ಗೋವಿನ ಬಲಿ ಎಂದು ತಪ್ಪಾಗಿ ಅರ್ಥೈಸಲಾಗಿದೆ. ಆದರೆ ಗೋ ಎಂದರೆ ಹಸು ಎಂದಷ್ಟೇ ಅಲ್ಲ. ಯಾಸ್ಕರ ಪ್ರಕಾರ ಗೋ ಎಂದರೆ " ಇಂದ್ರಿಯ " ಎಂದೂ ಅರ್ಥವಿದೆ." ವಾಕ್" ವಾಣಿ ಎಂದೂ ಅರ್ಥವಿದೆ.ಇಲ್ಲಿ ಗೋಮೇಧ ಎಂದರೆ "ವಾಕ್ ಸಂಯಮ" ಎಂದು ಅರ್ಥ. ಮಾತನ್ನು ನಿಯಂತ್ರಣದಲ್ಲಿಡು ಎಂದು ಅರ್ಥ. ಅಂದರೆ ವಾಕ್ ಸಂಯಮ ಯಜ್ಞಕ್ಕೆ ಗೋಮೇಧಾ ಎಂದು ಹೆಸರು.ಗೋಮೇಧಾ ಎಂದರೆ ಹಸುವನ್ನು ಬಲಿಕೊಡುವ ಯಜ್ಞವಲ್ಲ.ವೇದಗಳ ಮೂಲ ಸಿದ್ಧಾಂತವೇ ಅಹಿಂಸೆಯಾದ್ದರಿಂದ ಈ ಅರ್ಥಗಳು ನಾವು ಹುಡುಕಿದರೆ ಸಿಗುತ್ತವೆ.ಮಾತನ್ನು ಹೇಗೆ ಆಡಬೇಕೆಂದೂ ವೇದದಲ್ಲಿಯೇ ಹೇಳಿದೆ. "ಹಿಟ್ಟನ್ನು ಜರಡಿ ಆಡಿದಂತೆ ಜರಡಿಯಾಡಿ ಮಾತನಾಡು" ಎಂದು ಹೇಳಿದೆ. ಹಿಟ್ಟನ್ನು ಜರಡಿಯಾಡಿ ಕಸ ಕಡ್ಡಿ ತೆಗೆದು ನಂತರವಷ್ಟೇ ರೊಟ್ಟಿ ಮಾಡುವುದಿಲ್ಲವೇ ಹಾಗೆ ಮಾತನ್ನು ಆಡುವ ಮುಂಚೆ ಜರಡಿಯಾಡಿ ಮಾತನಾಡು. ಅಂದರೆ ಮಾತನಾಡುವ ಮುನ್ನ ನಾವಾಡುವ ಮಾತು ಸತ್ಯವೇ, ಎಂದು ತಿಳಿದಿರಬೇಕು.ಇದು ಮೊದಲನೆಯ ಹಂತ. ಎರಡನೆಯದು "ಪ್ರಿಯವೇ" . ನಾನಾಡುವ ಮಾತು ಬೇರೆಯವರಲ್ಲಿ ದ್ವೇಶ ಉಂಟುಮಾಡುತ್ತದೋ, ಉದ್ವೇಗ ಉಂಟುಮಾಡುತ್ತದೋ, ಅಥವಾ ಪ್ರಿಯವಾಗುತ್ತದೋ , ಹಿತವಾಗುತ್ತದೋ ಎಂಬುದನ್ನು ಆಲೋಚಿಸಿ ನಂತರ ನಮ್ಮ ಬಾಯಿಂದ ಮಾತು ಹೊರಬರಬೇಕು. ಈಬಗ್ಗೆ ನಾವು ಯೋಚಿಸಿದ್ದೇವೆಯೇ?
ಈ ಒಂದು ಮಾತಿನ ನಿಯಂತ್ರಣವಿದ್ದರೆ ಮನೆಯಲ್ಲಿ, ಸಮಾಜದಲ್ಲಿ, ದೇಶದಲ್ಲಿ ಅಶಾಂತಿ ಮೂಡುವುದೇ ಇಲ್ಲ. ಮಾತನಾಡುವ ಮುಂಚೆ ಅದು ಸತ್ಯವೇ,ಪ್ರಿಯವೇ, ಹಿತವೇ ಎಂದು ಆಲೋಚಿಸಿ ಮಾತನಾಡಿದರೆ ಸಮಾಜದಲ್ಲಿ ಸಾಮರಸ್ಯಕ್ಕೆ ಬಂಗ ಬರುವುದಿಲ್ಲ.ಸತ್ಯವೂ, ಪ್ರಿಯವೂ, ಹಿತವೂಆದ ಮಾತನ್ನಾಡಿದರೆ ಯಾರಿಗೆ ಇಷ್ಟವಾಗುವುದಿಲ್ಲ? ಭದ್ರೈಷಾಂ ಲಕ್ಷ್ಮೀರ್ನಿಹಿತಾಧಿವಾಚಿ"ಮಂಗಳಕರವಾದ ಸಂಪತ್ತು ,ಶ್ರೇಯಸ್ಕರವಾದ ಹಿತ ಅಂತಹಾ ಮಾತಿನಲ್ಲಿ ನೆಲೆಗೊಂಡಿದೆ. ಬ್ಯಾಂಕಿನಲ್ಲಿರುವ ಡಿಪಾಸಿಟ್ ನಮ್ಮನ್ನು ಕಾಪಾಡುವುದಿಲ್ಲ. ನಿಜವಾದ ಸಂಪತ್ತು ನಮ್ಮ ಮಾತಿನಲ್ಲಿದೆ. ಮಾತು ಸರಿಯಾಗಿದ್ದಲ್ಲಿ ಸಂಪತ್ತನ್ನು ಗಳಿಸುವುದು ಕಷ್ಟವಿಲ್ಲ.ಆದರೆ ಮಾತು ಸರಿಯಿಲ್ಲದಿದ್ದಾಗ ಇರುವ ಸಂಪತ್ತನ್ನೂ ಕಳೆದುಕೊಳ್ಳಬೇಕಾಗುತ್ತದೆ.ಹೀಗೆ ಜರಡಿಯಿಂದಆಡಿಸಿ ಮಾತನಾಡಬೇಕು, ಇದನ್ನು ವಾಕ್ ಸಂಯಮ ಎನ್ನುವರು. ವಾಕ್ ಸಂಯಮ ಯಜ್ಞಕ್ಕೆ ಗೋಮೇಧಾ ಯಜ್ಞ ಎಂದುಕರೆದರು.ಆದರೆ ಅದನ್ನು ಹಸುವನ್ನು ಬಲಿಕೊಡುವ ಒಂದು ಯಜ್ಞಎಂದು ತಪ್ಪಾಗಿ ಅರ್ಥೈಸಿ ಹಸುವನ್ನು ಬಲಿಕೊಟ್ಟು ಅದರ ವಪೆಯನ್ನು ಯಜ್ಞಕ್ಕೆ ಹಾಕಿ, ಇನ್ನು ಯಜ್ಞಕ್ಕೆ ಗೋಬಲಿ ಕೊಟ್ಟಮೇಲೆ ಮಾಂಸವನ್ನು ತಿನ್ನುವುದರಲ್ಲಿ ತಪ್ಪೇನು, ಎಂದೆಣಿಸಿ ಮಾಂಸವನ್ನೂ ಭಕ್ಷಿಸಿದರು.ಇದಕ್ಕಿಂತ ಮೂರ್ಖತನ ಬೇರೊಂದಿದೆಯೇ? ಇಂತಾ ಅನರ್ಥ ಎಲ್ಲಿಯವರೆಗೆ ಬೆಳೆದಿದೆ ಎಂದರೆ "ಗೋಘ್ನ" ಎಂಬ ಮಾತಿದೆ. ಇದಕ್ಕೆ ಏನು ಅರ್ಥೈಸಿದ್ದಾರೆಂದರೆ ಮನೆಗೆ ಬಂದ ಅಥಿತಿಗಳಿಗೆ ಊಟದಲ್ಲಿ ಗೋಮಾಂಸ ಬಡಿಸು. ಗೋಘ್ನ ಎನ್ನುವುದಕ್ಕೆ ಇನ್ನೊಂದು ಅರ್ಥ ಗೋವಿನ ಉತ್ಪತ್ತಿ , ಎಂದರೆ ಹಾಲು ಮೊಸರು, ತುಪ್ಪ ಬಡಿಸಿ ಸತ್ಜರಿಸು ಎಂದು ಅರ್ಥೈಸುವ ಬದಲು ಗೋಮಾಂಸ ಬಡಿಸು ಎಂದು ಅರ್ಥೈಸಿದರು!
ಅಥಿತಿಯನ್ನು ಗೋವಿನಿಂದ ಉಪಚರಿಸಬೇಕೆಂದರೆ ಗೋ ಎಂದರೆ ವಾಕ್ ಎಂತಲೂ ಅರ್ಥವಿರುವುದರಿಂದ ಅಥಿತಿಯನ್ನು ಒಳ್ಳೆಯ ಹಿತವಾದ ಮಾತುಗಳಿಂದ ಉಪಚರಿಸು ಎಂದರ್ಥವಾಗುತ್ತದೆ. ದೊಡ್ದ ದೊಡ್ಡ ವಿಸ್ವಾಂಸರುಗಳೂ ಸಹ ಇದನ್ನು ತಪ್ಪು ತಪ್ಪಾಗಿ ಅರ್ಥೈಸಿದ್ದರ ಪರಿಣಾಮ ಬಹಳ ಅನರ್ಥಗಳು ಸಂಭವಿಸಿವೆ, ವೇದದ ಮುಖಕ್ಕೆ ಮಸಿ ಬಳಿಯುವಂತಹ ಕೆಲಸವಾಗಿದೆ. ಅಂದರೆ ಒಂದೊಂದುಶಬ್ಧವನ್ನೂ ಅರ್ಥಮಾಡಿಕೊಳ್ಳುವಾಗ ಮೂಲ ಸಿದ್ಧಾಂತವನ್ನು ಮರೆತಿದ್ದರಿಂದ ಇಂತಹಾ ಅನರ್ಥಗಳಾಗಿವೆ. ಅಂದರೆ ಮೂಲ ಸಿದ್ಧಾಂತವೇನು? ಯಜ್ಞವೆಂದರೆ ಅಹಿಂಸೆ. ಅದನ್ನೇ ಮರೆತು ಅರ್ಥಹುಡುಕಿದ್ದರಿಂದ ಬಹಳ ಅನರ್ಥಗಳು ಘಟಿಸಿರುವುದು ಸುಳ್ಳಲ್ಲ.
ಯಜ್ಞ
ಯಜ್ಞ:[ವೇದಾಧ್ಯಾಯೀ ಸುಧಾಕರ ಶರ್ಮರ ಉಪನ್ಯಾಸದ ಆಯ್ದ ಭಾಗ]
ಕೇವಲ ಸಮಿತ್ತನ್ನು ಹೋಮಕುಂಡಕ್ಕೆ ಹಾಕಿ ಸ್ವಾಹಾ, ಇದಂ ನಮಮ, ಎನ್ನುವುದಕ್ಕೇ ಯಜ್ಞದ ಅರ್ಥ ಮುಗಿದುಬಿಡುವುದಿಲ್ಲ. ಇದಕ್ಕೆ ಇನ್ನೂ ವಿಸ್ತಾರವಾದ ಅರ್ಥವಿದೆ.ಯಜ್ಞವನ್ನು ಅರ್ಥ ಮಾಡಿಕೊಳ್ಳಬೇಕಾದರೆ ಅದು ಯಾವಧಾತುವಿನಂದ ಬಂತು ಅಲ್ಲಿಂದಲೇ ತಿಳಿಯಬೇಕು.ಆಗ ನಮಗೆ ಸರಿಯದ ಅರ್ಥ ಸಿಗುತ್ತದೆ.ನಾವು ವೇದಾಂಗಕ್ಕೆ ಹೋಗಿ ಆರ್ಶೇಯ ಕ್ರಮದಲ್ಲಿ ಅರ್ಥ ನೋಡುವುದು ಸರಿಯಾದ ಕ್ರಮ. ಯಜ್ಞ ಎನ್ನುವುದಕ್ಕೆ ಅರ್ಥ ಹುಡುಕಿದಾಗ -ಯಜ್ ದೇವಪೂಜಾ ಸಂಗತಿಕರಣ ದಾನೇಶು, ಇದು ಮೂಲದಲ್ಲಿರುವ ಧಾತು. ದೇವಪೂಜ, ಸಂಗತಿಕರಣ ಮತ್ತು ದಾನ ಎಂಬ ಮೂರು ಪದಗಳು ಇದರಿಂದ ಮೂಡುತ್ತವೆ. ಶತಪತಬ್ರಾಹ್ಮಣದಲ್ಲಿ ಹೇಳುತ್ತದೆ "ಯಜ್ಞೋವೈಶ್ರೇಷ್ಠತಮಂ ಕರ್ಮ" ಶ್ರೇಷ್ಠತಮ ಕರ್ಮ ಎಂದಾಗ [ಶ್ರೇಷ್ಠ-ಶ್ರೇಶ್ಠತರ-ಶ್ರೇಷ್ಠತಮ]ಅಂದರೆ ಅತ್ಯಂತಶ್ರೇಷ್ಠವಾದ ಕರ್ಮಗಳಿಗೆ ಯಜ್ಞ ಎಂದು ಅರ್ಥೈಸಲಾಗಿದೆ.ನಾವು ಮಾಡುವ ಆಲೋಚನೆಗಳು, ನಾವು ಆಡುವ ಮಾತುಗಳು, ನಾವು ಮಾಡುವ ಕೆಲಸ ಎಲ್ಲದರಿಂದಲೂ ನಾವು ಯಜ್ಞವನ್ನು ಮಾಡಲು ಸಾಧ್ಯವಿದೆ. ಕೇವಲ ಹೋಮಕುಂಡದ ಅಗ್ನಿಯಿಂದ ಮಾಡುವ ಯಜ್ಞವನ್ನಷ್ಟೇ ನಾವು ಯಜ್ಞ ಎಂದು ಭಾವಿಸಬೇಕಿಲ್ಲ. ನಾವು ಮಾಡುವ ಯಾವುದೇ ಕೆಲಸವನ್ನು ಶ್ರೇಷ್ಠತಮವಾಗಿ ಮಾಡಿದರೆ ಅದು ಯಜ್ಞ ಎನಿಸಿಕೊಳ್ಳುತ್ತದೆ. ನಾವು ಪುರೋಹಿತರಿಂದ ಯಜ್ಞಕುಂಡದ ಎದುರು ಮಾಡುವ ಹೋಮವನ್ನು ಮಾತ್ರವೇ ಯಜ್ಞ ವೆಂದುಭಾವಿಸುತ್ತೇವೆ ,ಆದರೆ ಇದೂ ಕೂಡ ಒಂದು ಯಜ್ಞವೇ ಹೊರತೂ ಯಜ್ಞ ವೆಂದರೆ ಇಷ್ಟೇ ಅಲ್ಲ. ನಾವು ಶ್ರೇಷ್ಠತಮವಾಗಿ ಮಾಡುವ ಪ್ರತಿಯೊಂದು ಕೆಲಸವೂ ಯಜ್ಞವೇ ಆಗಿದೆ.ಈ ಒಂದು ವಿಶಾಲವಾದ ಅರ್ಥವು ದೊರೆತಾಗ ನಮ್ಮ ಇಡೀ ಜೀವನವನ್ನೇ ಯಜ್ಞವನ್ನಾಗಿ ಮಾಡಿಕೊಳ್ಳಬಹುದು.ನಾವು ಇಡೀ ದಿನವನ್ನೇ ಯಜ್ಞವನ್ನಾಗಿ ಮಾಡಿಕೊಳ್ಳಬಹುದು.ನಾವು ಮಾಡುವ ಆಲೋಚನೆಗಳು ಇದಕ್ಕಿಂತ ಇನ್ನೂ ಶ್ರೇಷ್ಠತಮವಾಗಿ ಮಾಡಬಹುದೇ ಎಂದು ಯೋಚಿಸಿ ಮಾಡಿದಾಗ ಅದು ಯಜ್ಞವಾಗುತ್ತದೆ.ನಾವು ಆಡುವ ಮಾತು ಇನ್ನೂ ಶ್ರೇಷ್ಠತಮವಾಗಿ ಆದಬಹುದೇ ಎಂದು ಆಲೋಚಿಸಿ ಆಡಿದಾಗ ಅದೂ ಯಜ್ಞವೇ ಆಗುತ್ತದೆ.ಮಾಡುವ ಕೆಲಸ ಯಾವುದೇ ಇರಬಹುದು ಅದನ್ನು ಶ್ರೇಷ್ಠತಮವನ್ನಾಗಿ ಮಾಡಿಗಾಗ ಅದೂ ಯಜ್ಞವೇ ಆಗುತ್ತದೆ. ನಾವು ಅಡಿಗೆ ಮಾಡುವ ಕೆಲಸವೇ ಆಗಲೀ, ಕಸ ಗುಡಿಸುವ ಕೆಲಸವೇ ಆಗಲೀ, ಸೌದೆ ಒಡೆಯುವ ಕೆಲಸವೇ ಆಗಲೀ, ಇದಕ್ಕಿಂತ ಶ್ರೇಷ್ಠತಮವಾಗಿ ಮಾಡಿದೆ ನೆಂದರೆ ಅದು ಯಜ್ಞವೆನಿಸುತ್ತದೆ. ಅಂದರೆ ಇದಕ್ಕಿಂತ ಇನ್ನು ಚೆನ್ನಾಗಿ ಮಾಡಲು ಸಾಧ್ಯವೇ ಇಲ್ಲವೆನ್ನುವಂತೆ ಅತ್ಯಂತ ಶ್ರದ್ಧೆಯಿಂದ ಮಾಡಿದಾಗ ಅದು ಯಜ್ಞವೆನಿಸುತ್ತದೆ.ಶಾಲೆಯಲ್ಲಿ ಪಾಠಮಾಡುವಾಗ ಚೆನ್ನಾಗಿ ಪಾಠಮಾಡಿದೆನೆಂದರೆ ಅದು ಶ್ರೇಷ್ಠ. ಸಂಬಳ ಪಡೆಯುತ್ತೇನಾದ್ದರಿಂದ ಮಕ್ಕಳಿಗೆ ದ್ರೋಹವಾಗದಂತೆ ಪಾಠಮಾಡುತ್ತೇನೆಂದರೆ ಅದು ಶ್ರೇಷ್ಠತರ. ಸಂಬಳ ಬಾರದಿದ್ದರೂ ಚಿಂತೆಯಿಲ್ಲ ಮಕ್ಕಳ ಅಭ್ಯುದಯಕ್ಕಾಗಿನಾನು ಅತ್ಯಂತಶ್ರದ್ಧೆಯಿಂದ ಪಾಠಮಾಡುತ್ತೇನೆಂದರೆ ಅದುಶ್ರೇಷ್ಠತಮ. ಇದು ಎಲ್ಲಾ ಕೆಲಸಕ್ಕೂ ಅನ್ವಯ.ಶ್ರೇಷ್ಠತಮ ಕೆಲಸವು ಯಜ್ಞ ಎನಿಸಿಕೊಳ್ಳುತ್ತದೆ. ಪ್ರತಿಯೊಂದು ಮಾತಿನಲ್ಲೂ ಶ್ರೇಷ್ಠ ,ಶ್ರೇಷ್ಠತರ, ಶ್ರೇಷ್ಠತಮ ಎಂದು ಪರಿಗಣಿಸಲು ಸಾಧ್ಯವಿದೆ. ಮಾತಿನಲ್ಲಿ,ಆಲೋಚನೆಯಲ್ಲಿ, ಕೆಲಸದಲ್ಲಿ ಶ್ರೇಷ್ಠತಮವಾದಾಗ ಅವುಗಳೆಲ್ಲವೂ ಯಜ್ಞ ಎನಿಸಿಕೊಳ್ಳುತ್ತವೆ.ನಮ್ಮ ಇಡೀ ಜೀವನವು ಯಜ್ಞಮಯವಾದಾಗ ನಮಗೆ ಸಿಗುವ ಲಾಭವೂ ಅಷ್ಟೇ ವಿಶೇಷವಾಗಿರುತ್ತದೆ.ನಮಗೆ ಉತ್ತಮ ಆರೋಗ್ಯ , ಸುಖ, ಸಂತೋಷ, ನೆಮ್ಮದಿ ಎಲ್ಲಾ ಬೇಕಾದರೆ ನಮ್ಮ ಜೀವನ ಯಜ್ಞಮಯವಾಗಿರಬೇಕು.ಆಗ ಎಲ್ಲವೂ ತಾನೇ ತಾನಾಗಿ ಲಭ್ಯವಾಗುತದೆ.ವೇದವು ನಮಗೆ ಹೇಳುವ ಮಾರ್ಗ ಇದೇ ಆಗಿದೆ- "ನಾನ್ಯ ಪಂಥಾ ಅಯನಾಯ ವಿದ್ಯತೇ" ಇದನ್ನು ಬಿಟ್ಟು ಅನ್ಯ ಮಾರ್ಗವಿಲ್ಲ. ಯಾರುಈ ಮಾರ್ಗವನ್ನು ಅರ್ಥಮಾಡಿಕೊಂಡು ಜೀವನ ಮಾಡುತ್ತಾರೋ ಅವರು ಇಲ್ಲೇ ಅಮೃತತ್ವವನ್ನು ಹೊಂದುತ್ತಾರೆ ಎಂದು ಹೇಳಿದೆ. ಅಮೃತತ್ವ ಎಂದರೇನು? ಮೃತ ಎಂದರೆ ಸಾವು , ಅಮೃತ ಎಂದರೆ ಸಾವಿಲ್ಲದಿರುವುದು.[ಇಲ್ಲಿ ಸುಧಾಕರ ಶರ್ಮರು ಮೃತ್ಯುವೆಂಬ ಪದವನ್ನು ಬಹುವಾಗಿ ವಿಶ್ಲೇಷಿಸಿದ್ದಾರೆ , ಅದನ್ನು ಇಲ್ಲಿ ಬಿಟ್ಟಿದ್ದೇನೆ] ಅಂದರೆ ಯಾರಿಗೂ ಸಾವು ತಪ್ಪಿದ್ದಲ್ಲವಾದರೂ ನಿಜವಾಗಿ ಮನುಷ್ಯನಿಗೆ ನಿಜವಾಗಿ ತೊಂದರೆ ಕೊಡುತ್ತಿರುವುದು ಸಾವಲ್ಲ, ಸಾವಿನಭಯ.ಯಾವಾಗ ಸಾವಿನಭಯ ಹೋಗುತ್ತದೆ, ಇನ್ಯಾವುದಕ್ಕೂ ಭಯ ಪಡುವ ಕಾರಣವೇ ಇಲ್ಲ.ಎಲ್ಲಾಭಯಗಳಿಗೂ ಮೂಲವೇ ಪ್ರಾಣಭಯ.ಆದ್ದರಿಂದ ಯಜ್ಞದ ಜ್ಞಾನದಿಂದ ಪ್ರಾಣಭಯದಿಂದ ದೂರವಾಗುತ್ತಾರೆ.ಯಾವಾಗ ಸಾವಿನಭಯವೇ ಇಲ್ಲ ಆಗ ಅಸತ್ಯ, ಅನ್ತ್ಯಾಯ, ಅಧರ್ಮಗಳಿಗೆ ಅಂಜದೆ ಸತ್ಯಮಾರ್ಗದಲ್ಲಿ ಅವರ ದಾರಿ ಸಾಗುತ್ತದೆ.
------------------------------------------------
ನನ್ನ ಮಾತು:
ಯಜ್ಞದ ಈ ಪರಿಕಲ್ಪನೆ ಮೂಡಿದಾಗ ನಮ್ಮ ಸಮಾಜದ ಸ್ಥಿತಿ ಎಷ್ಟು ಭವ್ಯ ವಾಗಬಹುದು!
ಸರ್ಕಾರಿ ಕಛೇರಿಯಲ್ಲಿನ ಒಬ್ಬ ನೌಕರ ತನ್ನ ಕರ್ತವ್ಯವನ್ನು ಶ್ರೇಷ್ಠತಮವಾಗಿ ನಿರ್ವಹಿಸಿದರೆ, ಬದುಕಿನ ಯಾವುದೇ ರಂಗದಲ್ಲಿರಲಿ ಆಯಾ ವ್ಯಕ್ತಿ ತನ್ನ ಕರ್ತವ್ಯವನ್ನುಶ್ರೇಷ್ಠತಮವಾಗಿ ನಿರ್ವಹಿಸಿದರೆ ನಮ್ಮ ದೇಶ ಸಮೃದ್ಧವಾಗಲು ಮತ್ತೇನು ಬೇಕು?
ಒಂದು ಕುಟುಂಬದ ಎಲ್ಲಾ ಸದಸ್ಯರೂ ತಾವು ಮಾತನಾಡುವ ಮುಂಚೆ, ಆಲೋಚಿಸುವ ಮುಂಚೆ, ಕೆಲಸಮಾಡುವ ಮುಂಚೆ, ವೇದದ ಪರಿಕಲ್ಪನೆಯಲ್ಲಿ ಶ್ರೇಷ್ಠತಮವಾಗಿ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಿದರೆ ಅದು ಸುಖೀ ಕುಟುಂಬ ಆಗದಿರದೇ?